Description
About the book :
ಕನ್ನಡ ಸಾಹಿತ್ಯದಲ್ಲಿ ವಿವಾದದ ಅಲೆಯನ್ನೇ ಎಬ್ಬಿಸಿದ ಭೈರಪ್ಪನವರ ಕೃತಿಯಾದ ಆವರಣವು ಹಲವಾರು ಹೆಸರಾಂತ ಲೇಖಕರಿಂದ ಟೀಕೆಗೆ ಒಳಗಾದರೂ ಸಹ ಇತಿಹಾಸದ ಸತ್ಯವನ್ನು ತಿಳಿಸುವ ಉದ್ದೇಶದಿಂದ ಹೊರಬಂದ ಕನ್ನಡದ ಅತ್ತ್ಯುತ್ತಮ ರಚನೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.
” ಇತಿಹಾಸ ಮತ್ತು ಇತಿಹಾಸಕಾರ ಇಬ್ಬರನ್ನೂ ‘ ಆವರಣ ‘ವು ಒಳಗೊಳ್ಳುತ್ತದೆ. ಕಾದಂಬರಿಯ ವಸ್ತು ಇತಿಹಾಸ ಮತ್ತು ಇತಿಹಾಸದ ಹೆಸರಿನಲ್ಲಿ ಚಲಾವಣೆಗೆ ಬರುವ ಸುಳ್ಳುಗಳು. ಪೂರ್ಣ ಇಸ್ಲಾಮಿ ಚೌಕಟ್ಟಿನಲ್ಲಿ ರಚಿಸಲ್ಪಟ್ಟಿರುವ ಈ ಕೃತಿಯ ಕಥಾನಾಯಕಿ ರಝಿಯಾ ಉರುಫ್ ಲಕ್ಷ್ಮಿ, ಕಥಾನಾಯಕ ಅವಳ ಶೌಹರ್ ಅಮೀರ, ಚಿತ್ರರಂಗದಲ್ಲಿ ಕೆಲಸ ಮಾಡುವ ದಂಪತಿಗಳು. ಮೂಲ ಹಿಂದೂ ಧರ್ಮದವಳಾದ ಲಕ್ಷ್ಮಿ, ಆಮೀರನಿಗಾಗಿ ತನ್ನ ತಂದೆಯ ಇಚ್ಛೆಗೆ ವಿರುದ್ಧವಾಗಿ ಇಸ್ಲಾಮ್ ಧರ್ಮಕ್ಕೆ ಮತಾಂತರಗೊಳ್ಳುತ್ತಾಳೆ. ಧರ್ಮದಲ್ಲಿ, ಅದರ ಆಚರಣೆಗಳಲ್ಲಿ ನಂಬಿಕೆ ಇಲ್ಲವೆಂದು, ಕೇವಲ ತೋರ್ಪಡಿಕೆಗಾಗಿ ಧರ್ಮ ಬದಲಾವಣೆಯೆಂದು ಅಮೀರ ಹೇಳಿದರೂ ಸಹ, ಕಥೆ ಮುಂದುವರೆದಂತೆ, ತಾನು ತನ್ನ ಧರ್ಮದಲ್ಲಿ ತನಗಿರುವ ವಿಶೇಷ ಅಧಿಕಾರಗಳನ್ನು ಚಲಾಯಿಸುವುದನ್ನು ಕಾಣಬಹುದು. ಇತಿಹಾಸದ ಸತ್ಯವನ್ನು ತಿಳಿಯುವ ಹಾಗು ತಿಳಿಸುವ ಕೆಲಸವನ್ನು ಲೇಖಕರು ಕಥಾನಾಯಕಿಯ ಮೂಲಕ ಮಾಡಿಸುತ್ತಾರೆ. ಕಾದಂಬರಿಯೊಳಗೆ ಮತ್ತೊಂದು ಕಥೆಯನ್ನು ಸೃಷ್ಟಿಸಿ, ಅದರ ಮುಖಾಂತರ ಭಾರತದಲ್ಲಿ ಮುಘಲರ ಆಳ್ವಿಕೆಯ ರೀತಿಯನ್ನು ಹೇಳುತ್ತದೆ ” .
Publisher : Sahitya Bhandara ; Hardcover ;
About the author :
ಜನಪ್ರಿಯ ಕಾದಂಬರಿಕಾರ ಎಸ್.ಎಲ್. ಭೈರಪ್ಪ ಅವರು ಮೀಮಾಂಸಕರೂ ಹೌದು. ಹಾಸನ ಜಿಲ್ಲೆ ಚೆನ್ನರಾಯಪಟ್ಟಣದ ಸಂತೇಶಿವರ ಗ್ರಾಮದಲ್ಲಿ 1931ರ ಆಗಸ್ಟ್ 20ರಂದು ಜನಿಸಿದರು. ತಂದೆ ಲಿಂಗಣ್ಣಯ್ಯ- ತಾಯಿ ಗೌರಮ್ಮ. ತಮ್ಮ ಹುಟ್ಟೂರಿನ ಸುತ್ತಮುತ್ತಲ ಶಾಲೆಗಳಲ್ಲಿ ಪ್ರಾಥಮಿಕ ವಿದ್ಯಾಭ್ಯಾಸ ಮುಗಿಸಿ ಮೈಸೂರಿಗೆ ಬಂದು ಶಾರದಾವಿಲಾಸ ಪ್ರೌಢಶಾಲೆಯಲ್ಲಿ ಓದಿ, ಮಹಾರಾಜ ಕಾಲೇಜಿನಲ್ಲಿ ಬಿ.ಎ. ಮಾಡಿ, ಮೈಸೂರು ವಿಶ್ವವಿದ್ಯಾನಿಲಯದಿಂದ ಎಂ.ಎ. ಪದವಿ ಗಳಿಸಿದರು. ಅನಂತರ ಹುಬ್ಬಳ್ಳಿಯ ಕಾಡುಸಿದ್ಧೇಶ್ವರ ಕಾಲೇಜಿನಲ್ಲಿ ಅಧ್ಯಾಪಕ (1958-60), ಗುಜರಾತಿನ ಸರ್ದಾರ್ ಪಟೇಲ್ ವಿಶ್ವವಿದ್ಯಾಲಯದಲ್ಲಿ ಉಪನ್ಯಾಸಕ (1960-66), ದೆಹಲಿಯ ರಾಷ್ಟ್ರೀಯ ಶಿಕ್ಷಣ ಮತ್ತು ತರಬೇತಿ ಶಿಕ್ಷಣ ಸಂಸ್ಥೆಯಲ್ಲಿ ಉಪಪ್ರಾಧ್ಯಾಪಕ (1967-1971) ರಾಗಿ ಸೇವೆ ಸಲ್ಲಿಸಿದ ಅವರು ಮೇಲೆ ಮೈಸೂರಿನಲ್ಲಿರುವ ಪ್ರಾದೇಶಿಕ ಶಿಕ್ಷಣ ಕಾಲೇಜಿಗೆ ವರ್ಗವಾಗಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸಿ 1991ರಲ್ಲಿ ವೃತ್ತಿಯಿಂದ ನಿವೃತ್ತರಾದರು. ಭೈರಪ್ಪನವರ ಸಾಹಿತ್ಯ ಸಾಧನೆಗೆ ಅನೇಕ ಪ್ರಶಸ್ತಿ ಬಂದಿವೆ, ಸನ್ಮಾನಗಳು ಸಂದಿವೆ. ತಂತು ಕಾದಂಬರಿಗೆ ಭಾರತೀಯ ಭಾಷಾ ಪರಿಷತ್ತಿನ ಪ್ರಶಸ್ತಿ ಲಭಿಸಿದೆ. ದಾಟು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ, ವಂಶವೃಕ್ಷ, ಸಾಕ್ಷಿ, ದಾಟು ಕಾದಂಬರಿಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ದೊರೆತಿವೆ,
ಮಾಸ್ತಿ ಪ್ರಶಸ್ತಿ (1994), ರಾಜ್ಯ ಸಾಹಿತ್ಯ ಅಕಾಡೆಮಿಯ ಗೌರವ ಪ್ರಶಸ್ತಿ (1985) ಇವರಿಗೆ ಲಭಿಸಿದೆ. ಕನಕಪುರದಲ್ಲಿ ನಡೆದ 67 ಅಖಿಲ ಕರ್ನಾಟಕ ಕನ್ನಡ ಸಾಹಿತ್ಯ ಸಮ್ಮೇಳನ (1999) ಅಧ್ಯಕ್ಷ ಸ್ಥಾನದ ಗೌರವ ಸಿಕ್ಕಿದೆ. ಸರಸ್ವತೀ ಸಮ್ಮಾನ್ ಪ್ರಶಸ್ತಿಯನ್ನು ಕನ್ನಡದಲ್ಲಿ ಪಡೆದವರಲ್ಲಿ ಮೊದಲಿಗರು ಇವರು. ಬರೆದ ಕಾದಂಬರಿಗಳೆಲ್ಲಾ ಜನಪ್ರಿಯವಾಗಿ ಹತ್ತಾರು ಮರುಮುದ್ರಣಗಳಾಗಿವೆ. ಮರಾಠಿ, ಇಂಗ್ಲಿಷ್, ಹಿಂದಿ ಮೊದಲಾದ ಭಾಷೆಗಳಿಗೆ ಅನುವಾದವಾಗಿವೆ. ವಂಶವೃಕ್ಷ, ತಬ್ಬಲಿಯು ನೀನಾದೆ ಮಗನೆ, ಮೊದಲಾದವು ಚಲನಚಿತ್ರಗಳಾಗಿವೆ. ಇವರು ಕಾದಂಬರಿಗಳನ್ನಷ್ಟೆ ಅಲ್ಲದೆ ಸೌಂದರ್ಯಮೀಮಾಂಸೆಯ ಹಲವಾರು ಗ್ರಂಥಗಳನ್ನು ರಚಿಸಿದ್ದಾರೆ. ಸತ್ಯ ಮತ್ತು ಸೌಂದರ್ಯ ಇವರು ರಚಿಸಿದ ಪಿ ಎಚ್ ಡಿ ಗ್ರಂಥವಾಗಿದೆ. ಸಾಹಿತ್ಯ ಮತ್ತು ಪ್ರತೀಕ, ಕಥೆ ಮತ್ತು ಕಥಾವಸ್ತು ಗ್ರಂಥಗಳು ಸಾಹಿತ್ಯ ಮೀಮಾಂಸೆಗೆ ಸಂಬಂಧಿಸಿವೆ. ನಾನೇಕೆ ಬರೆಯುತ್ತೇನೆ. ಭಿತ್ತಿ ಆತ್ಮವೃತ್ತಾದ ಗ್ರಂಥವಾಗಿವೆ. ಆವರಣ, ಕವಲು ಅವರ ಈಚಿನ ಕಾದಂಬರಿಗಳಾಗಿವೆ. ವಂಶವೃಕ್ಷ, ದಾಟು, ತಂತು, ಅಂಚು, ಪರ್ವ, ಗೃಹಭಂಗ, ಅನ್ವೇಷಣ, ಮಂದ್ರ, ಸಾರ್ಥ, ನಾಯಿನೆರಳು, ಧರ್ಮಶ್ರೀ, ದೂರಸರಿದರು ಮತದಾನ ಮುಂತಾದವು ಅವರ ಕಾದಂಬರಿಗಳಾಗಿವೆ.


Reviews
There are no reviews yet.